ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ನಿವಾಸಿ ರಮೇಶ್ (51) ಅವರು ಶೆಡ್ನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಮೃತರ ಸಹೋದರ ಸಂತೋಷ್ ಅಮೀನ್ ನೀಡಿದ ಮಾಹಿತಿಯಂತೆ, ಜೂನ್ 20ರ ರಾತ್ರಿ 10:42 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6:30 ಗಂಟೆಯ ನಡುವಿನ ಅವಧಿಯಲ್ಲಿ ಬೋಳ ಗ್ರಾಮದ ಮನೆಯ ಸಮೀಪದ ಶೆಡ್ನಲ್ಲಿ ರಮೇಶ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ದೊರಕಿದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 32/2026ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




