ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಅವರ ಕುಟುಂಬದ ಸದಸ್ಯರು, ತಮ್ಮ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಕೆ.ಎಸ್. ಈಶ್ವರಪ್ಪ, ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಶಾಲಿನಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಈ ಕುರಿತಂತೆ ಆದೇಶಿಸಿತು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿ 12 ವರ್ಷಗಳು ಕಳೆಯುತ್ತಿದೆ. ದೂರು ದಾಖಲಾದ ಸಂದರ್ಭದಲ್ಲಿ ಬಿಎನ್ಎಸ್ಎಸ್ ಜಾರಿಯಲ್ಲಿರಲಿಲ್ಲ. ಹೀಗಾಗಿ, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ ಪಿಸಿ) ಅಡಿಯಲ್ಲಿ ತನಿಖೆ ನಡೆಸಲು ನಿರ್ದೇಶನ ನೀಡಿರುವುದರಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಉಲ್ಲಂಘನೆ ಆಗಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಇದೇ ವೇಳೆ, ‘ತನಿಖೆಗೆ ಸಹಕರಿಸಿದರೆ ಬಂಧಿಸುವುದಿಲ್ಲ” ಎಂಬ ಲೋಕಾಯುಕ್ತ ಪರ ವಕೀಲರ ವಾಗ್ದಾನವನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರು ತನಿಖೆಗೆ ಸಹಕರಿಸಿದರೆ ಬಂಧಿಸಬಾರದು” ಎಂದು ನಿರ್ದೇಶಿಸಿತು.
‘ಎಫ್ಐಆರ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
“ಈಶ್ವರಪ್ಪ 2006 ರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವರಾದ ನಂತರ ಶಿವಮೊಗ್ಗದಲ್ಲಿ ತಮ್ಮ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಶಾಲಿನಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿ ಖರೀದಿಸಿದ್ದಾರೆ. ಈ ಮೂವರೂ ಜಂಟಿಯಾಗಿ ಹಲವು ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು, ಆಟೋಮೊಬೈಲ್ ಷೋ ರೂಂಗಳ ಒಡೆತನ ಹೊಂದಿದ್ದಾರೆ. ಕೇವಲ ಮೂರೂವರೆ ವರ್ಷದಲ್ಲಿ ಇವರ ಆಸ್ತಿ ಶೇ 100 ಪಟ್ಟು ಅಧಿಕವಾಗಿದೆ’ ಎಂದು ಆರೋಪಿಸಿ ಶಿವಮೊಗ್ಗದ ವಕೀಲ ಬಿ.ವಿನೋದ್ 2021ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಇದರನ್ವಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13(1)(ಡಿ) (ಅಕ್ರಮ ಸಂಪಾದನೆಗೆ ಅಧಿಕಾರ ದುರ್ಬಳಕೆ), 13(1)(ಇ), ಭಾರತೀಯ ದಂಡ ಸಂಹಿತೆ–1860ರ ಕಲಂ 420ರ (ವಂಚನೆ) ಮತ್ತು ಕಲಂ 120-ಬಿ (ಅಪರಾಧಿಕ ಒಳಸಂಚು) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ 2025ರ ಏಪ್ರಿಲ್ 5ರಂದು ಆದೇಶಿಸಿತ್ತು.




