ಕೋಟ: ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ 407 ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡಿ-ಹರ್ಕಾಡಿ ಗ್ರಾಮದ ಕೋಳ್ಕೇರೆ ರಸ್ತೆಯ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ನಾರಾಯಣ ಶೆಟ್ಟಿ ಮೃತಪಟ್ಟ ದುರ್ದೈವಿ. ಮಂಗಳವಾರ ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸೈಬ್ರಕಟ್ಟೆ ಮಾರ್ಗವಾಗಿ ಹಾಲಾಡಿ ಕಡೆಗೆ ಸಾಗುತ್ತಿದ್ದ 407 ವಾಹನದ ಚಾಲಕ ತೀರಾ ಎಡಬದಿಗೆ ಚಲಾಯಿಸಿ ಅವರಿಗೆ ಢಿಕ್ಕಿ ಹೊಡೆದಿದ್ದಾನೆ.
ಅಪಘಾತದ ರಭಸಕ್ಕೆ ನಾರಾಯಣ ಶೆಟ್ಟಿಯವರ ತಲೆ ಹಾಗೂ ಎದೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ತಕ್ಷಣವೇ ಅವರನ್ನು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮೃತರ ಅಳಿಯ ಗಣೇಶ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.




