ಉಡುಪಿ: ಕುಂದಾಪುರದಲ್ಲಿ ಶುಕ್ರವಾರ ನಸುಕಿನ ವೇಳೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಗೆ ಗುಂಡು ಹೊಡೆದು ಕೊಂದ ಆರೋಪಿಯನ್ನು ಬಂಧಿಸಿರುವುದಾಗಿ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಡೆರಿಕ್ ಕ್ರಾಸ್ತಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಐವನ್ ರಿಚರ್ಡ್ ಮುನ್ನ ಕೊಲೆಗೀಡಾದ ವ್ಯಕ್ತಿ ಎಂದು ತಿಳಿಯಲಾಗಿದೆ.
ಜುಲೈ 30ರಂದು ರಾತ್ರಿ 11:45ಕ್ಕೆ ಡೆರಿಕ್ ಎಂಬಾತ ಐವನ್ ರಿಚರ್ಡ್ ಅವರಿಗೆ ಕರೆ ಮಾಡಿ,ಚಟ್ಲಿ ವಿಚಾರದಲ್ಲಿ ಬಾಕಿ ಹಣ ವಸೂಲಿಗೆ ಮಧ್ಯಸ್ಥಿಕೆ ವಹಿಸುವ ಬಗ್ಗೆ ಮಾತನಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದು, “ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ” ಎಂದು ಡೆರಿಕ್ ಸವಾಲು ಹಾಕಿದ್ದಾನೆ.ಅದರಂತೆ ಜುಲೈ 31ರಂದು ರಾತ್ರಿ 1:30ಕ್ಕೆ ಡೆರಿಕ್ ತನ್ನ ಲೊಕೇಶನ್ ಅನ್ನು ಐವನ್ಗೆ ಕಳುಹಿಸಿದ್ದಾನೆ.
ಬಳಿಕ ಚರ್ಚ್ ರಸ್ತೆಯ ಹೋಲಿ ರೋಸಾರಿಯೋ ಚರ್ಚ್ ಎದುರಿನ ಕಾಂಕ್ರೀಟ್ ರಸ್ತೆಯಲ್ಲಿ ಐವನ್ ಕಾರು ನಿಲ್ಲಿಸಿಕೊಂಡಿದ್ದ ವೇಳೆ, ಬೆಳಗಿನ ಜಾವ ಸುಮಾರು 3:15ಕ್ಕೆ ಕಪ್ಪು-ಕೆಂಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಡೆರಿಕ್ ಕಾರಿನಿಂದ ಇಳಿದು, ಕೈಯಲ್ಲಿದ್ದ ಗನ್ನಿಂದ ಐವನ್ನ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ವಿವರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿತನಾದ ಡೆರಿಕ್ ಕ್ರಾಸ್ತಾ ತಂದೆ: ವಿಲಿಯಂ ಕ್ರಾಸ್ತಾ, ಚರ್ಚ್ ರೋಡ್, ಕುಂದಾಪುರ ಈತನನ್ನು ಹೇರಬುಡಿಕೆ, ಬೆಳಕೆ ಗ್ರಾಮ, ಭಟ್ಕಳ ತಾಲೂಕು, ಉತ್ತರ ಕನ್ನಡ ಜಿಲ್ಲೆ ಎಂಬಲ್ಲಿ ಈ ದಿನ ದಸ್ತಗಿರಿ ಮಾಡಿ ವಶಕ್ಕೆ ಪಡೆಯಲಾಗಿದ್ದು, ಮಾನ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು. ತನಿಖೆ ಮುಂದುವರಿದಿರುತ್ತದೆ.





