Home Kundapura News ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾತನಾಡಿ : ಕೇಶವ ಭಟ್..!

ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾತನಾಡಿ : ಕೇಶವ ಭಟ್..!

ಕುಂದಾಪುರ, ಆ.5: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ” ಎಂದು ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿರುವ ಕೆಲ ಬಿಜೆಪಿ ಪರ ನಾಯಕರ ಹೇಳಿಕೆ ಸಂಪೂರ್ಣ ದಿಕ್ಕು ತಪ್ಪಿಸುವಂತಿದ್ದು, ಇದು ಅವರ ಅಜ್ಞಾನವೋ ಅಥವಾ ಜನರನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಪ್ರಯತ್ನವೋ ಎಂಬ ಅನುಮಾನ ಮೂಡಿಸುತ್ತದೆ ಎಂದು ಕಾಂಗ್ರೆಸ್ ಯುವ ನಾಯಕ ಹಾಗೂ ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶೇಷವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಒಂದು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ಪ್ರಕ್ರಿಯೆಯ ಬಗ್ಗೆ ಕನಿಷ್ಠ ಆಡಳಿತಾತ್ಮಕ ಅರಿವು ಇದ್ದವರು ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ರಾಜ್ಯ ಸರ್ಕಾರ ಯೋಜನಾವಾರು ಮತ್ತು ಅಗತ್ಯಕ್ಕೆ ಅನುಗುಣವಾಗಿ ಅನುದಾನ ಮಂಜೂರು ಮಾಡುತ್ತದೆ. ಕೇಂದ್ರ ಸರ್ಕಾರ ಯಾವುದೇ ವಿಧಾನಸಭಾ ಕ್ಷೇತ್ರಕ್ಕೆ ನೇರವಾಗಿ ಹಣ ವರ್ಗಾಯಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ವ್ಯವಸ್ಥೆ ಇಲ್ಲ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ನಿಗದಿತ ನಿಯಮಗಳಿದ್ದು, ಅವು ಸಂಬಂಧಿತ ಇಲಾಖೆಗಳ ಮೂಲಕವೇ ಜಾರಿಯಾಗುತ್ತವೆ ಎಂದು ಕೇಶವ ಭಟ್ ತಿಳಿಸಿದರು.

ಸಂಸದರ ನಿಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವವರು ಅದರ ವಾಸ್ತವಿಕತೆ ಏನೆಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಒಬ್ಬ ಲೋಕಸಭಾ ಸದಸ್ಯರಿಗೆ ದೊರೆಯುವ ವಾರ್ಷಿಕ ₹5 ಕೋಟಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು (MPLADS) ಉಡುಪಿ ಜಿಲ್ಲೆಯ ಐದು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಬೇಕಾಗುತ್ತದೆ. ಅಂದರೆ ಸರಾಸರಿ ಲೆಕ್ಕದಲ್ಲಿ ಒಂದು ವಿಧಾನಸಭಾ ಕ್ಷೇತ್ರಕ್ಕೆ ಬರುವ ಪಾಲು ₹40 ಲಕ್ಷಕ್ಕೂ ಕಡಿಮೆ. ಇಂತಹ ಸೀಮಿತ ಮೊತ್ತವನ್ನೇ ಇಡೀ ಕ್ಷೇತ್ರದ ಅಭಿವೃದ್ಧಿಗೆ ಕಾರಣ ಎಂದು ಹೇಳುವುದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ ಎಂದು ಅವರು ಟೀಕಿಸಿದರು.

ಕುಂದಾಪುರ ಸೇರಿದಂತೆ ಉಡುಪಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಭಾವನಾತ್ಮಕ ರಾಜಕೀಯ ಭಾಷಣಗಳನ್ನು ಮಾಡುವ ಬದಲು, ಯಾವ ಇಲಾಖೆಯಿಂದ ಎಷ್ಟು ಅನುದಾನ ಬಂದಿದೆ, ಯಾವ ಕಾಮಗಾರಿಗೆ ಎಷ್ಟು ಹಣ ಬಿಡುಗಡೆಯಾಗಿದೆ, ಯಾವ ಯೋಜನೆ ಯಾವ ಹಂತದಲ್ಲಿದೆ ಎಂಬ ವಾಸ್ತವಾಂಶಗಳನ್ನು ಜನರ ಮುಂದೆ ಇಡಲಿ. ಸುಳ್ಳು ಪ್ರಚಾರದಿಂದ ಅಭಿವೃದ್ಧಿಯನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಕೇಶವ ಭಟ್ ಹೇಳಿದರು.

ಸಾರ್ವಜನಿಕ ಜೀವನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ಬಿಟ್ಟು, ಆಡಳಿತ ವ್ಯವಸ್ಥೆ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳುವಳಿಕೆಯನ್ನು ನೀಡಬೇಕು. ಜನರು ಈಗ ಪ್ರಚಾರಕ್ಕಿಂತ ದಾಖಲೆಗಳನ್ನು ನಂಬುವ ಕಾಲ ಬಂದಿದೆ ಎಂಬುದನ್ನು ಬಿಜೆಪಿ ನಾಯಕರು ಅರಿತುಕೊಳ್ಳಬೇಕು ಎಂದು ಕಾಂಗ್ರೆಸ್ ಯುವ ನಾಯಕ ಹಾಗೂ ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ಹೇಳಿದರು.