Home Latest ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ : ವಾಯುಪಡೆ ಮಹತ್ವದ ಹೇಳಿಕೆ : ಪಾಕಿಸ್ತಾನಕ್ಕೆ ಎಚ್ಚರಿಕೆ ರವಾನೆ…!!

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ : ವಾಯುಪಡೆ ಮಹತ್ವದ ಹೇಳಿಕೆ : ಪಾಕಿಸ್ತಾನಕ್ಕೆ ಎಚ್ಚರಿಕೆ ರವಾನೆ…!!

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯಿಂದ ಕೊನೆಯಾಯ್ತು ಎನ್ನುವಾಗಲೇ ಭಾರತೀಯ ವಾಯುಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎನ್ನುವ ಹೇಳಿಕೆ ನೀಡಿದೆ.

ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಗಿದಿಲ್ಲ. ಅದು ಇನ್ನೂ ಮುಂದುವರಿದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಕದನ ವಿರಾಮ ಘೋಷಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ನೀಡಿದೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು ಸರಿಯಾದ ಸಮಯದಲ್ಲಿ ಮಾಹಿತಿ ನೀಡಲಾಗುವುದು. ಊಹಾಪೋಹ ಮತ್ತು ಖಚಿತವಲ್ಲದ ಮಾಹಿತಿಗಳಿಂದ ದೂರ ಇರುವಂತೆ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ.