ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ನಡೆದಿದ್ದ ಉದ್ಯಮಿ, ಕಾಂಗ್ರೇಸ್ ಮುಖಂಡ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಅವರ ಮೇಲೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಒಂದು ಲಭ್ಯವಾಗಿದೆ.
ಈ ಭೀಕರ ಕೃತ್ಯದ ಮಾಸ್ಟರ್ ಮೈಂಡ್ ಎನ್ನಲಾದ ವ್ಯಕ್ತಿಯನ್ನು ಉಡುಪಿ ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.
ಬಂಧಿತ ಮಾಸ್ಟರ್ಮೈಂಡ್ ಆರೋಪಿಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಆದಾಗ್ಯೂ, ಘಟನೆ ನಡೆದ ತಕ್ಷಣ ಕಾರ್ಯಪ್ರವೃತ್ತರಾಗಿದ್ದ ಉಡುಪಿ ಪೊಲೀಸರು, ಗುಂಡಿನ ದಾಳಿ ನಡೆಸಿ ಈಗಾಗಲೇ ಬಂಧನಕ್ಕೊಳಗಾಗಿರುವ ಹಂತಕರು ನೀಡಿದ ಸುಳಿವು ಹಾಗೂ ತಾಂತ್ರಿಕ ಸಾಕ್ಷ್ಯಧಾರಗಳ ಆಧಾರದ ಮೇಲೆಯೇ ಈ ಕಾರ್ಯಾಚರಣೆ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಕರಣದ ಮುಂದಿನ ತನಿಖೆ ತೀವ್ರಗೊಂಡಿದ್ದು, ಶೀಘ್ರದಲ್ಲೇ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.





