ಸುಳ್ಯ: ವ್ಯಕ್ತಿಯೋರ್ವರಿಗೆ ಕಿರುಕುಳ ನೀಡಿ, ಮಾರಣಾಂತಿಕ ಹಲ್ಲೆ ಹಾಗೂ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಸುಳ್ಯ ಕಸಬ ನಿವಾಸಿ ಮುಹಮ್ಮದ್ ರಫೀಕ್ (41), ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ ಯಾನೆ ಮನು (42) ಎಂದು ಗುರುತಿಸಲಾಗಿದೆ.
ಪ್ರಕರಣದ ದೂರುದಾರರಾದ ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ, ಅವರ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು, 2025ರ ಅ. 16 ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮುಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿ ಕಳುಹಿಸಿರುತ್ತಾರೆ.
ಇದಾದ ಬಳಿಕ 2025ರ ಅ.17 ರಂದು ಪಿರ್ಯಾದುದಾರರ ಗಂಡ ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ದೂರುದಾರರ ಗಂಡ ಅಬ್ದುಲ್ ಜಬ್ಬಾರ್ನ ಸಾವಿಗೆ ರಫೀಕ್ ಪಡು ಮತ್ತು ಇತರರು ಕಾರಣರಾಗಿರುತ್ತಾರೆ ಎಂಬುದಾಗಿ ಅ. 18 ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಅವರು ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿರುವುದರಿಂದ ಪ್ರಸ್ತುತ ಈ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿ ಆರೋಪಿ ಮುಹಮ್ಮದ್ ರಫೀಕ್ ಹಾಗೂ ಇನ್ನೋರ್ವ ಆರೋಪಿ ಮನೋಹರ್ ಕೆ.ಎಸ್ ಯಾನೆ ಮನು ಎಂಬವರನ್ನು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಮುಂದಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



