ಬೆಂಗಳೂರು: ಜಾನಪದ ಕಲೆ, ಸಂಗೀತ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಅಪೂರ್ವ ಸಾಧನೆ ಮತ್ತು ಸಮಾಜಮುಖಿ ಕೊಡುಗೆಯನ್ನು ಪರಿಗಣಿಸಿ ಖ್ಯಾತ ಜಾನಪದ ಕಲಾವಿದ ಡಾ. ಸಚಿನ್ ಸಾಲ್ಯಾನ್ ಅವರನ್ನು “ಭಾರತ ಭೂಷಣ ರಾಷ್ಟ್ರ ಪ್ರಸ್ತಿಗೆ “ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು 2026ರ ಆಗಸ್ಟ್ 16ರಂದು ಸೈನಿಕರೊಂದಿಗೆ ನಡೆಯುವ ಸ್ವಾತಂತ್ರ್ಯೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.
ಡಾ. ಸಚಿನ್ ಸಾಲ್ಯಾನ್ ಅವರು ಕಳೆದ 15ಕ್ಕೂ ಹೆಚ್ಚು ವರ್ಷಗಳಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾವಿರಕ್ಕೂ ಹೆಚ್ಚು ಜಾನಪದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪದ ಕಲೆಯ ಸಂರಕ್ಷಣೆ ಮತ್ತು ಪ್ರಚಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಉಜೀಲು ಕುಣಿತ, ಕರಗ, ವೀರಗಾಸೆ, ಪೂಜಾ ಕುಣಿತ ಸೇರಿದಂತೆ ಅನೇಕ ಜಾನಪದ ಕಲಾ ಪ್ರಕಾರಗಳಲ್ಲಿ ಪರಿಣತಿ ಹೊಂದಿರುವ ಅವರು, ಯುವ ಕಲಾವಿದರಿಗೆ ತರಬೇತಿ ನೀಡುವ ಮೂಲಕ ಕಲೆಯ ಬೆಳವಣಿಗೆಗೆ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ.
ಅವರ ಸೇವೆಯನ್ನು ಗುರುತಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸಾಧಕ ರತ್ನ ಪ್ರಶಸ್ತಿ, ಸಿರಿಗನ್ನಡ ರಾಷ್ಟ್ರೀಯ ಸೇವಾರತ್ನ ಪ್ರಶಸ್ತಿ, ಇಂಡಿಯನ್ ಐಕಾನ್ ಆಫ್ ದಿ ಇಯರ್ ಸೇರಿದಂತೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಅಮೆರಿಕದ ಪ್ರತಿಷ್ಠಿತ ವಾಷಿಂಗ್ಟನ್ ಡಿಜಿಟಲ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.
ಇದೀಗ ದೊರೆತಿರುವ “ಭಾರತ ಭೂಷಣ ರಾಷ್ಟ್ರ” ಪ್ರಶಸ್ತಿ ಅವರ ಕಲಾ ಜೀವನದ ಮತ್ತೊಂದು ಮಹತ್ವದ ಗೌರವವಾಗಿದ್ದು, ಜಾನಪದ ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಅವರ ನಿರಂತರ ಸೇವೆಗೆ ಸಂದ ಗೌರವವೆಂದು ಕಲಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.






