ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬಸ್ಸಿನ ಇಡಿಸಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಗಮನಿಸಿದ ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ.
ನಿರ್ವಾಹಕರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿಯಿಂದ ಬಸ್ಸಿನ ಮುಂಭಾಗದ ಭಾಗ ಸೇರಿದಂತೆ ಕೆಲವು ಉಪಕರಣಗಳಿಗೆ ಹಾನಿಯಾಗಿದೆ.




