ಲಾತೂರು: ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಪೊಲೀಸರು ಕಾಕ್ರೋಚ್ ಜನತಾ ಪಾರ್ಟಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
ಅನುಮತಿ ಇಲ್ಲದೇ ಸರಕಾರಿ ಶಾಲೆಗೆ ಪ್ರವೇಶಿಸುವುದಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಈ ಎಫ್ಐಆರ್ ದಾಖಲಾಗಿದೆ.
ಜಿಲ್ಲಾ ಪಂಚಾಯತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶಾದ್ಬಾನೋ ಖೈರಾತ್ ಅಲಿ (53) ನೀಡಿದ ದೂರಿನ ಆಧಾರದಲ್ಲಿ ಔಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ಅನುಸಾರ, ಮುಂಬೈನಿಂದ 500ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಔಸಾ ಸಮೀಪದ ಜಾವಳಿ ಗ್ರಾಮದ ಜಿಲ್ಲಾ ಪಂಚಾಯತ್ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದೆ. ದೀಪ್ಕೆ ಹಾಗೂ ಅವರ ಸಹಚರರು ಯಾವುದೇ ಅನುಮತಿ ಪಡೆಯದೇ ಶಾಲೆಯೊಳಗೆ ಪ್ರವೇಶಿಸಿ, ವಿದ್ಯಾರ್ಥಿಗಳ ನಡುವೆ ಕುಳಿತು ಹಲವು ಪ್ರಶ್ನೆಗಳನ್ನು ಕೇಳಿರುವ ಆರೋಪಿಸಲಾಗಿದೆ. ಇದು ಶಾಲೆಯ ಪಾಠ ಹಾಗೂ ಸರಕಾರಿ ಕೆಲಸಕ್ಕೆ ಅಡ್ಡಿಯಾಯಿತು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಶಿಕ್ಷಕರನ್ನು ಅಮಾನತುಗೊಳಿಸುವಂತೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.




