ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ನಡೆದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾಧ್ಯಮ ಬಂಧುಗಳ ಪ್ರತಿನಿಧಿಗಳಾಗಿ ಗೋಪಾಲಕೃಷ್ಣ ಪಾದೂರು, ಜನಾರ್ದನ ಕೊಡವೂರು, ರಿಚಾರ್ಡ್ ಡಿಸೋಜ ಕಲ್ಯಾಣಪುರ, ಕಿರಣ್ ಮಂಜನಬೈಲು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ರಕ್ಷೆ ಸ್ವೀಕರಿಸಿದರು.
ಪತ್ರಕರ್ತ ಜನಾರ್ದನ ಕೊಡವೂರು ಮಾತನಾಡಿ, ನಾಡಿನ ಭವ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ನಡೆ ಪ್ರಶಂಸನೀಯ. ಇಂತಹ ಭಾವನಾತ್ಮಕ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳನ್ನೂ ಜೋಡಿಸಿಕೊಂಡಿರುವುದು ಸಂತಸ ತಂದಿದೆ ಎಂದರು.
ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ರಕ್ಷಾ ಬಂಧನದ ಸಂದೇಶ ನೀಡಿದರು.
ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದ ಎಲ್ಲರಿಗೂ ಆರತಿ ಬೆಳಗಿ, ತಿಲಕವನ್ನಿಟ್ಟು, ರಕ್ಷೆ ಕಟ್ಟಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ನಳಿನಿ ಪ್ರದೀಪ್ ರಾವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಸಹಿತ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಜ್ಯೋತಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ವಂದಿಸಿದರು.







