ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಸಾವಿನ ಪ್ರಕರಣ ಕುರಿತಂತೆ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಸಿಬಿಐ ಕೂಡಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಬೇಕು. ದಿಶಾ ತಂದೆ ಸತೀಶ್ ಸಾಲಿಯಾನ್ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು. ಸೂಕ್ತ ಸಾಕ್ಷ್ಯಾಧಾರ ಸಿಗುವವರೆಗೂ ಯಾರನ್ನೂ ಆರೋಪಿಗಳೆಂದು ಪರಿಗಣಿಸಬಾರದು ಎಂದು ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ರಂಜಿತ್ ಸಿನ್ಹಾ ರಾಜ ಭೋಂಸ್ಲೆ ಅವರನ್ನು ಒಳಗೊಂಡ ಪೀಠ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಿಬಿಐಗೆ ತಕ್ಷಣ ಹಸ್ತಾಂತರಿಸುವಂತೆ ನ್ಯಾಯಾಲಯವು ಮುಂಬೈ ಪೊಲೀಸರಿಗೆ ಆದೇಶಿಸಿದೆ.
‘ತನಿಖೆ ಬಳಿಕ ಯಾರ ವಿರುದ್ಧವೂ ಆರೋಪ ಸಾಬೀತುಮಾಡುವಂತಹ ಸಾಕ್ಷ್ಯ ಸಿಗದಿದ್ದರೆ, ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಸಿಬಿಐ, ಅಂತಿಮ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.
ವರದಿಯನ್ನು ಪ್ರಶ್ನಿಸಲು ಸತೀಶ್ ಸಾಲಿಯಾನ್ ಅವರಿಗೆ ಅವಕಾಶವಿರುತ್ತದೆ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
2020ರ ಜೂನ್ 8ರಂದು, ಮುಂಬೈ ಸಬರ್ಬನ್ನ ಮಲಾಡ್ನಲ್ಲಿರುವ ವಸತಿ ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಮೃತಪಟ್ಟಿದ್ದರು. ಘಟನೆ ನಡೆದು ಆರು ದಿನಗಳ ಬಳಿಕ ಸುಶಾಂತ್ ಮೃತದೇಹ, ಬಾಂದ್ರಾದ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ದಿಶಾ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ಆತ್ಮಹತ್ಯೆ ಎಂದು ವರದಿ ಸಲ್ಲಿಸಿದ್ದರು.
ತಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲ್ಲಲಾಗಿದೆ ಎಂದು ಆರೋಪಿಸಿ ತಂದೆ ಸತೀಶ್ ಸಾಲಿಯನ್ ಕಳೆದ ವರ್ಷ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಶಿವಸೇನಾ(ಯುಬಿಟಿ) ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ಐಆರ್ ದಾಖಲಿಸಿ, ಸಿಬಿಐ ತನಿಖೆಗ ನಡೆಸಬೇಕೆಂದು ಕೋರಿದ್ದರು.
ನನ್ನ ಮಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಅವಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಕೆಲ ರಾಜಕೀಯ ಪ್ರಭಾವಿಗಳನ್ನು ರಕ್ಷಣೆ ಮಾಡಲು ಸತ್ಯ ಮುಚ್ಚಿಡಲಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.ಆದರೆ ಈಗ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸಿದೆ. ಮುಂದೆ ಸಿಬಿಐ ತಂಡ ಯಾವ ರೀತಿ ತನಿಖೆ ಮಾಡುತ್ತದೆ ಎಂದು ಕಾದು ನೋಡಬೇಕು.






