ಉಪ್ಪಿನಂಗಡಿ: ಇಳಂತಿಲ ಗ್ರಾಮದ ಕಡವಿನಬಾಗಿಲು ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಡವಿನಬಾಗಿಲು ನಿವಾಸಿ ಝಿಯಾದ್ (24) ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ನ್ಯಾಯಾಲಯದ ವಾರೆಂಟ್ ಆದೇಶದ ಮೇರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಲೆಂದು ಹೋದ ಪೊಲೀಸರಿಗೆ ಆತ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸಿದ್ದ ಎಂದು ಹೇಳಲಾಗಿದೆ.
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ತಾನು ವಾರದ ಹಿಂದೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ನೌಶಾದ್ ಎಂಬಾತನಿಂದ 7,500 ರೂ ಮೌಲ್ಯದ 15 ಗ್ರಾಮ್ ಗಾಂಜಾವನ್ನು ಖರೀದಿಸಿರುವುದಾಗಿ ತಿಳಿಸಿರುತ್ತಾನೆ.
ಆತನನ್ನು ತಪಾಸಣೆಗೆ ಒಳಪಡಿಸಿದಾಗ ಆತನಲ್ಲಿ 10.33 ಗ್ರಾಮ್ ತೂಕದ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.




