ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೊಲೆರೋ ಪಿಕ್ಅಪ್ ವಾಹನ, ಡೀಸೆಲ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳು.
ಸೆಪ್ಟೆಂಬರ್ 3ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿ.ಹೆಚ್.ಸಿ. 516 (ಶ್ರೀಧರ್) ಮತ್ತು ಪಿ.ಸಿ. 453 ರವಿರಾಜ್ ರವರು ಬೈಕ್ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಅಲಂಪಾಡಿ ಕ್ರಾಸ್ ಬಳಿ ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್ ಒಂದರ ಬಳಿ ಬೊಲೆರೋ ಪಿಕ್ಅಪ್ ವಾಹನ ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ವಾಹನದ ಬಳಿ ನಿಂತಿದ್ದ ಮೂವರು ವ್ಯಕ್ತಿಗಳು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದಾಗ, ಇಬ್ಬರನ್ನು ಪೊಲೀಸರು ಚಾಣಾಕ್ಷತನದಿಂದ ಹಿಡಿದು ವಿಚಾರಣೆಗೊಳಪಡಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಇಂಧನ ಟ್ಯಾಂಕ್ನಿಂದ ಡೀಸೆಲ್ ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ಥಳ ತಪಾಸಣೆ ನಡೆಸಿದ ಪೊಲೀಸರು ಕ್ಯಾನ್ನಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಖಾಲಿ ಕ್ಯಾನ್ಗಳು, ಡೀಸೆಲ್ ಕಳವಿಗೆ ಬಳಸುತ್ತಿದ್ದ ರಬ್ಬರ್ ಪೈಪ್ ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ಪಿಕ್ ಅಪ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 118/2026, ಕಲಂ: 35 (1) (ಡಿ) ಬಿ.ಎನ್.ಎಸ್.ಎಸ್. 2023 ಹಾಗೂ ಕಲಂ 303 (2) ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





