Home Latest ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ಸ್ವಚ್ಛತಾ ಅಭಿಯಾನ…!!

ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ಸ್ವಚ್ಛತಾ ಅಭಿಯಾನ…!!

ಉಡುಪಿ: ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯ ವತಿಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಬುಧವಾರ ನಡೆಯಿತು.

ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 21 ಕಾಲೇಜುಗಳ 200ಕ್ಕೂ ಅಧಿಕ ರೋವರ್‌ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿ ರೈಲು ನಿಲ್ದಾಣದ ಆವರಣವನ್ನು ಸ್ವಚ್ಛಗೊಳಿಸಿದರು.

ಸ್ವಚ್ಛತಾ ಕಾರ್ಯದ ಬಳಿಕ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತೆ ಹಾಗೂ ಸೌಹಾರ್ದದ ಸಂದೇಶವನ್ನು ಸಾರುವ ಕಾರ್ಯಕ್ರಮದಲ್ಲಿ ರೈಲ್ವೆ ಅಧಿಕಾರಿ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ್ ಬಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಆರ್‌ಎಸ್‌ಎಲ್ ಅರವಿಂದ್, ಆರ್‌ಎಲ್‌ಗಳಾದ ಸ್ಮಿತಾ ಫೆರ್ನಾಂಡಿಸ್ ಹಾಗೂ ವಂದನ, ರೈಲ್ವೆ ಸಿಬ್ಬಂದಿ ಮತ್ತು ರೈಲ್ವೆ ಆರಕ್ಷಕ ಠಾಣೆಯ ಎಎಸ್‌ಐ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಕಾರ್ಯಕ್ರಮವನ್ನು ಸಂಘಟಿಸಿದರು.