Home Latest ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಲು ಆಗ್ರಹ ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿಕೆಶಿ ಅವರಿಂದ ಜನರ ಅಹವಾಲು ಸ್ವೀಕಾರ…!!

ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಲು ಆಗ್ರಹ ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿಕೆಶಿ ಅವರಿಂದ ಜನರ ಅಹವಾಲು ಸ್ವೀಕಾರ…!!

ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳ ನಿವಾಸಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರ ಭೂಹಕ್ಕಿಗೆ ಯಾವುದೇ ಧಕ್ಕೆ ಬರಬಾರದು. ಗ್ರಾಮಸಭೆ ನಡೆಸದೆ ಕೇವಲ ವೈಮಾನಿಕ ಸಮೀಕ್ಷೆ ಆಧರಿಸಿ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದರು.

ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಿ ಕಸ್ತೂರಿರಂಗನ್ ವರದಿ ಬಾಧಿತ ಪ್ರದೇಶಗಳ ಜನರ ಅಹವಾಲು ಆಲಿಸಲಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಹಾಗೂ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರವನ್ನು ಒತ್ತಾಯಿಸಬೇಕು. ತುಳು ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಎಂಬ ಬೇಡಿಕೆಗಳನ್ನೂ ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.

ಕರಾವಳಿಯ ಬಂದರು, ವಿಮಾನ ನಿಲ್ದಾಣ, ರೈಲು ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಇರುವ ಮೂಲಸೌಕರ್ಯವನ್ನು ಬಳಸಿಕೊಂಡು ಕರಾವಳಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಬೇಲಾಡಿ, ಭಾನು ಭಾಸ್ಕರ್ ಪೂಜಾರಿ, ಅಜಿತ್ ಹೆಗ್ಡೆ, ಅನಿಲ್ ಪೂಜಾರಿ ಮಾಳ, ಯೋಗೀಶ್ ನಯನ್ ಇನ್ನಾ ಉಪಸ್ಥಿತರಿದ್ದರು.