ಪುತ್ತೂರು : ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ನಡೆಸಿದಾಗ, ಆತ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ನಿವಾಸಿ ಮಹಮ್ಮದ್ ಮೋಹಾದ್ ಎಸ್ (33) ಬಂಧಿತ ಆರೋಪಿ.
ಮಂಗಳವಾರ (ಫೆ. 17) ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಈ ಘಟನೆ ನಡೆದಿದೆ.
ಕಾಂಚನ ಮುಕ್ವೆ ಎಂಬಲ್ಲಿ ವ್ಯಕ್ತಿಯೊಬ್ಬ ಸಿಗರೇಟು ಸೇದುತ್ತಾ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ.ಟಿ. ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ (NDPS) ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



