Home Karavali Karnataka ಜೂ.12 ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ….!!

ಜೂ.12 ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ….!!

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ (ಜೂ.12) ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಕೆಲವು ದಿನಗಳ ವಿರಾಮದ ಬಳಿಕ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಜೂನ್ 14 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ತಿಳಿಯಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ.

ವಿಜಯಪುರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮನಾಬಾದ್, ಚಿತ್ತಾಪುರ, ಚಿಟಗೊಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟ್ವಾಳ, ಕುಂದಾಪುರ ಮತ್ತು ಜೆಕೆವಿಕೆ ಸೇರಿದಂತೆ ಗಮನಾರ್ಹ ಮಳೆಯಾಗಿದೆ.

ಐಎಂಡಿ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜೂನ್ 12 ರಿಂದ 16 ರವರೆಗೆ, ಉತ್ತರ ಕರ್ನಾಟಕದಲ್ಲಿ ಜೂನ್ 12 ರಿಂದ 15 ರವರೆಗೆ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 15 ರಿಂದ 16 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ.