ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ಮದ್ಯದ ಬಾಟಲಿ, ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದುಹೋಗಿದ್ದು, ಕ್ರೀಡಾಂಗಣ ಕಸದ ಕೊಂಪೆಯಾಗಿ ಮಾರ್ಪಟ್ಟಿತ್ತು. ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕಾರ್ಮಿಕರ ಜೊತೆ ಕ್ರೀಡಾಂಗಣಕ್ಕೆ ದೌಡಾಯಿಸಿದ ಗ್ರಾಪಂ ಅಧ್ಯಕ್ಷೆ ಮಾಲತಿ ಸಂದೀಪ್ ಅವರು ಕ್ರೀಡಾಂಗಣವನ್ನು ಸ್ವಚ್ಛಗೊಳಿಸಿದ್ದಾರೆ.
ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟ ಆಯೋಜಕರಿಗೆ ಸ್ವಚ್ಛತೆ ಕಾಪಾಡಲು ಸೂಚನೆ ನೀಡಲಾಗಿದೆ. ಅಲ್ಲದೆ, ಕ್ರೀಡಾಂಗಣದ ಸುತ್ತಲೂ ಸಿಸಿ ಕ್ಯಾಮರವನ್ನು ಶೀಘ್ರವೇ ಅಳವಡಿಸುತ್ತೇವೆ. ತ್ಯಾಜ್ಯ ಬಿಸಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ.
ಬೀಟ್ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಖಾಲಿ ಬಾಟಲ್ ಬಿಸಾಡಿ ಹೋಗುವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಧ್ಯಕ್ಷೆ ಮಾಲತಿ ಸಂದೀಪ್ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್ ಮಾತನಾಡಿ, ಕ್ರೀಡಾಂಗಣದಲ್ಲಿ ಹಲವಾರು ಕ್ರೀಡಾಕೂಟ ನಡೆಯುತ್ತಿದ್ದು ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಲ್ಲಿ ಕೂಡಲೇ ಸಿಸಿ ಕ್ಯಾಮೆರಾವನ್ನು ಅಳವಡಿಸುತ್ತೇವೆ. ಸಾರ್ವಜನಿಕರು ಸ್ವಚ್ಛತೆಯನ್ನು ಕಾಪಾಡಬೇಕು ಯಾವುದೇ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಡೆ ಬಿಸಾಡೋದು ಸರಿಯಲ್ಲ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
