ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟಗೊಂಡ ಘಟನೆ ವರದಿಯಾಗಿದೆ.
ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುವರ್ಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಸತೀಶ್ ಸುವರ್ಣ ಅವರು
ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಮಾರ್ಚ್ 6ರಂದು ಸಂಜೆ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಸುಡುಮದ್ದು ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರು ಕಂದಾಯ ನಿರೀಕ್ಷಕ ರವಿ ಅವರೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ವೇಳೆ ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನಿರಿಸಿರುವುದು ಬೆಳಕಿಗೆ ಬಂದಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಹಾಗೂ ಬೇಜಾವಬ್ದಾರಿಯಿಂದ ಸುಡುಮದ್ದು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ಪರಿಣಾಮವಾಗಿ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟುಹೋಗಿದ್ದರೂ ಪ್ರಾಣಹಾನಿ ಸಂಭವಿಸಿಲ್ಲ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಆರೋಪಿತ ಅಬ್ದುಲ್ ಗಫೂರ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



