ಉಡುಪಿ : ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳು ಹಾಗು ಖಾಸಗಿ ಆಸ್ಪತ್ರೆಯ ವೈದ್ಯರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಅರೋಗ್ಯ ಇಲಾಖೆಯ ನೌಕರರ ಮುಷ್ಕರದಿಂದ ಜನ ಸಾಮಾನ್ಯರಿಗೆ ಸರಕಾರಿ ಆಸ್ಪತ್ರೆಯಲ್ಲಿ ಅರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.ಸಾರ್ವಜನಿಕರಿಗೆ ಅರೋಗ್ಯ ಸೇವೆಯನ್ನು ಪಡೆಯಲು ತೊಂದರೆಯಾಗದಂತೆ ಹಾಗೂ ತುರ್ತು ಸೇವೆಗಳನ್ನು ಪಡೆಯಲು ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳಿಗೆ ಬಡ ಜನರು ಅರೋಗ್ಯ ಸೇವೆಗಳನ್ನು ಪಡೆಯಲು ಆಗಮಿಸುತ್ತಾರೆ. ಅವರುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದರೊಂದಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಗೆ ಕೂಡಲೇ ಸ್ಪಂದಿಸಬೇಕು ಎಂದರು.
ಸಭೆಯಲ್ಲಿ ಡಿ. ಹೆಚ್. ಓ ಡಾ. ಬಸವರಾಜ್ ಹುಬ್ಬಳ್ಳಿ, ಕೆ.ಎಂ.ಸಿ ಆಸ್ಪತ್ರೆಯ ಮುಖ್ಯಸ್ಥರು, ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು,ಸರಕಾರಿ ಹಾಗು ಖಾಸಗಿ ವೈದ್ಯಧಿಕಾರಿಗಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.



