ಉಡುಪಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮದೇ ಆಡಳಿತದ ವಿರುದ್ಧ ತಾವೇ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಗರು ಸ್ವತಃ ನಗೆಪಾಟಲಿಗೀಡಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಟೀಕಿಸಿದರು.
ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಬಹುತೇಕ ಬಿಜೆಪಿಗರು ಗ್ಯಾರಂಟಿ ಯೋಜನೆಯ ಫಲಾನುಭವಿಗಳೇ ಆಗಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳು ಗ್ರಾಮ ಪಂಚಾಯತ್ಗಳ ಮುಂದೆ ಪ್ರತಿಭಟನೆ ಮಾಡುವುದರ ಬದಲಿಗೆ ಪ್ರತೀ ಗ್ರಾಮ ಪಂಚಾಯತ್ನಲ್ಲಿ ಬಿದ್ದಿರುವ ಮನೆ ನಿವೇಶನ, ಹಕ್ಕು ಪತ್ರ ಕುರಿತಾದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಿ ಎಂದರು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಜ್ ಉಪಸ್ಥಿತರಿದ್ದರು.