ಕೊಲ್ಲೂರು: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಗುರುಪ್ರಸಾದ (31) ಅವರ ಚಿಕ್ಕಪ್ಪನ ಮಗ ಸಂದೀಪ್ (28) ಹೊಳೆಯಲ್ಲಿ ಸ್ನಾನ ಮಾಡುವ ವೇಳೆ ಮುಳುಗಿ ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಗೋವಿಂದ ತೀರ್ಥ ಹೊಳೆಯ ಕಿಳಿನಗುಂಡಿ ಪ್ರದೇಶದಲ್ಲಿ ನಡೆದಿದೆ.
ಮಾರ್ಚ್ 22 ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಸಂದೀಪ್ ತನ್ನ ಸ್ನೇಹಿತರೊಂದಿಗೆ ಗೋವಿಂದ ತೀರ್ಥ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸ್ನೇಹಿತರೊಂದಿಗೆ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಆಳವಾದ ಜಾಗಕ್ಕೆ ಹೋಗಿ ಈಜಲು ಆಗದೆ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸಂದೀಪ್ ಮುಳುಗಿದ ಬಳಿಕ ಜೊತೆಯಲ್ಲಿದ್ದ ಸ್ನೇಹಿತರು ಹಾಗೂ ಸ್ಥಳೀಯರ ಸಹಕಾರದಿಂದ ಹೊಳೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ಬಳಿಕ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.





