Home Crime ಧರ್ಮಸ್ಥಳ: ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ : ಪೊಲೀಸರಿಂದ ತನಿಖೆ…!!

ಧರ್ಮಸ್ಥಳ: ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ : ಪೊಲೀಸರಿಂದ ತನಿಖೆ…!!

ಬೆಳ್ತಂಗಡಿ:  ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದು, ಅಲ್ಲದೆ ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದಿರುವುದಾಗಿ ಹೇಳಿದ್ದು ಅದರ ಕಳೇಬರವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು.

ಅದೇ ದಿನ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ದ.ಕ. ಜಿಲ್ಲಾ ಎಸ್.ಪಿ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು.10ರಂದು ತಕ್ಷಣವೇ ಜಾರಿ ಬರುವಂತೆ ಅನುಮೋದನೆ ನೀಡಿದೆ. ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ ದೂರುದಾರನನ್ನು ಪ್ರತಿನಿಧಿಸುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ ಐ ಆ‌ರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ ಸಾಕ್ಷಿ ದೂರುದಾರನ ವಯಸ್ಸು, ವೃತ್ತಿಯ ಸ್ಥಳ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗ ಪಡಿಸಿರುವುದರಿಂದ ಸ್ಥಳೀಯ ಅನೇಕರು ಸಾಕ್ಷಿ ದೂರುದಾರನನ್ನು ಅಂದಾಜಿಸಿದ್ದಾರೆ.

ಆದರೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರನ ಗುರುತನ್ನು ಬಹಿರಂಗ ಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದರು. ಇದೀಗ ಇದೇ ವಿಚಾರದ ಬಗ್ಗೆ ವಿಚಾರಣೆ ಆರಂಭವಾಗಿದೆ ಎಂದು ತಿಳಿದುಬಂದಿದೆ.