ದೆಹಲಿ : ಅನುಮತಿ ಇಲ್ಲದೆ ಹಾಡುಗಳನ್ನು ಬಳಸಿಕೊಂಡ ಕಾರಣ ಕಾಪಿರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ.
‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.
ಖ್ಯಾತ ಮ್ಯೂಸಿಕ್ ಕಂಪನಿ ‘ಎಮ್ಆರ್ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು. ಆದರೆ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಈ ಹಾಡುಗಳನ್ನು ಅನುಮತಿ ಪಡೆಯದೇ ಬಳಸಿಕೊಳ್ಳಲಾಗಿತ್ತು ಎಂದು ಎಮ್ಆರ್ಟಿ ಮ್ಯೂಸಿಕ್ ಆರೋಪಿಸಿತ್ತು.
ವಿಚಾರಣೆ ವೇಳೆ ರಕ್ಷಿತ್ ಶೆಟ್ಟಿ ಮತ್ತು ತಂಡವು ತಮ್ಮ ಸಮರ್ಥನೆಯಾಗಿ ಕೆಲವು ವಾದಗಳನ್ನು ಮಂಡಿಸಿತ್ತು. ‘ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು 31 ಸೆಕೆಂಡ್ ಮಾತ್ರ ಬಳಸಲಾಗಿದೆ. ಇದು ಅತೀ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗುವುದಿಲ್ಲ ಎಂದು ವಾದಿಸಲಾಗಿತ್ತು.
ಈ ವಾದವನ್ನು ತಿರಸ್ಕರಿಸಿರುವ ಕೋರ್ಟ್, ಹಾಡುಗಳ ಬಳಕೆಯು ಕೇವಲ ಕಾಕತಾಳೀಯವಲ್ಲ. ಬದಲಾಗಿ ಸಿನಿಮಾದ ಕಥೆಯ ನಿರೂಪಣೆಗೆ ಪೂರಕವಾಗಿ ಮತ್ತು ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ನಾಯಕ ಸಂಕಷ್ಟದಲ್ಲಿರುವಾಗ ‘ನ್ಯಾಯ ಎಲ್ಲಿದೆ’ ಹಾಡನ್ನು ಹಿನ್ನೆಲೆಯಲ್ಲಿ ಹಾಕಿರುವುದು ಒಂದು ಸೃಜನಾತ್ಮಕ ನಿರ್ಧಾರವಾಗಿದ್ದು, ಇದು ಹಕ್ಕುಸ್ವಾಮ್ಯದ ಅಡಿ ಬರುತ್ತದೆ ಎಂದು ಕೋರ್ಟ್ ಹೇಳಿದೆ.
ನ್ಯಾಯಾಲಯವು ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸುವುದರಿಂದ ವಿನಾಯಿತಿ ನೀಡಿದೆಯಾದರೂ, ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟಿನ ಆದೇಶ ನೀಡಿದೆ. ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ಈಗಾಗಲೇ ಠೇವಣಿ ಇರಿಸಲಾಗಿರುವ 20 ಲಕ್ಷ ರೂಪಾಯಿಗಳನ್ನು ಎಮ್ಆರ್ಟಿ ಮ್ಯೂಸಿಕ್ಗೆ ನೀಡಲು ಸೂಚಿಸಿದೆ.





