ಮಂಗಳೂರು : ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದವು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು.
ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ, 1 ಮಂತ್ರದೇವತೆಯ ಬೆಳ್ಳಿಯ ಮೂರ್ತಿ, 1 ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, 1 ಬೆಳ್ಳಿಯ ಕಡ್ಸಲೆ, 2ತಾಮ್ರದ ಘಂಟೆ, 4 ತಾಮ್ರದ ಚೆಂಬು ಹಾಗೂ 1 ಎಲ್.ಇ.ಡಿ ಟಿ.ವಿ ಕಳವು ಮಾಡಿದ ಬಗ್ಗೆ ದೂರು ದಾಖಲಾಗಿತ್ತು.
ಸುರತ್ಕಲ್ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು, ತಾಂತ್ರಿಕ ವಿಧಾನಗಳನ್ನು ಪರಿಶೀಲನೆ ನಡೆಸಿದಾಗ ವಾಜೀದ್ ಜೆ ಅಲಿಯಾಸ್ ವಾಜಿ ಎಂಬಾತನ್ನು ದಸ್ತಗಿರಿ ಮಾಡಿ ವಿಚಾರಿಸಲಾಯ್ತು. ಈತನ ಹೇಳಿಕೆಯಂತೆ ಕೃತ್ಯ ಎಸಗಿದ್ದಾಗಿ ಹಾಗೂ ಮನೆಕಳ್ಳತನ ಮಾಡಿದ ಮಾಲಿನಲ್ಲಿ ಹಿತ್ತಾಳೆ ಹಾಗೂ ತಾಮ್ರದ ಸಾಮಾಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದಂತೆ ಸಯ್ಯದ್ ಆಲಿ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಮನೆಯಿಂದ ಕಳ್ಳತನವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.



