ಉಡುಪಿ: ಟೆಲಿಗ್ರಾಂ ಮೂಲಕ ಪರಿಚಯವಾದ ವ್ಯಕ್ತಿ ಹೂಡಿಕೆ ಆಮಿಷ ನೀಡಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜಯಂತ್ ಅವರಿಗೆ ಎರಡು ವರ್ಷಗಳ ಹಿಂದೆ ಟೆಲಿಗ್ರಾಂನಲ್ಲಿ ‘ಕಾರ್ತಿಕ್’ ಎಂಬಾತ ಪರಿಚಯವಾಗಿದ್ದನು. ನಂತರ 15/01/2026 ರಂದು ವಾಟ್ಸಪ್ ಮೂಲಕ ಸಂಪರ್ಕಿಸಿದ ಆತ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿದ್ದಾನೆ.
ನಂಬಿಕೆ ಮೂಡಿಸಲು ತನ್ನ ಆಧಾರ್ ಕಾರ್ಡ್, ಪಾಸ್ಪೋರ್ಟ್ ಪ್ರತಿಗಳು ಹಾಗೂ ಭಾವಚಿತ್ರವನ್ನು ಕಳುಹಿಸಿದ್ದು, ಅದರಲ್ಲಿ ಮಂಗಳೂರಿನ ಕಸಬಾ ಬೇಂಗ್ರೆ ನಿವಾಸಿ ಮಹಮ್ಮದ್ ಶಫೀಕ್ ಎಂಬ ಹೆಸರು ಉಲ್ಲೇಖವಾಗಿತ್ತು. ಇದನ್ನು ನಂಬಿದ ಜಯಂತ್, ಆತ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹26,55,000/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ಹೂಡಿಕೆ ಮಾಡಿದ ಮೊತ್ತವನ್ನಾಗಲಿ, ಲಾಭಾಂಶವನ್ನಾಗಲಿ ವಾಪಸು ನೀಡದೇ ಆರೋಪಿಯು ಮೋಸ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ನೀಡಿದ ದೂರಿನ ಮೇರೆಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.





