ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪರಿಚಿತರು ತಲವಾರು ದಾಳಿ ನಡೆಸಿ, ಕೊಲೆ ಯತ್ನ ನಡೆಸಿದ್ದಾರೆ ಎಂದು ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ.
ಆದರೆ ಪೊಲೀಸರು ತನಿಖೆ ನಡೆಸಿದಾಗ ಸಾರ್ವಜನಿಕರನ್ನು ಪ್ರಚೋದಿಸಿ, ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನು ಸೃಷ್ಟಿಸಿರುವುದಲ್ಲದೇ, ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿ, ಸುಳ್ಳು ದೂರು ನೀಡಿರುವ ಹಿನ್ನೆಲೆಯಲ್ಲಿ, ಆತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಸಜೀಪ ನಡು ಗ್ರಾಮದ ಉಮರ್ ಪಾರೂಕ್ ಎಂದು ಗುರುತಿಸಲಾಗಿದೆ.
ಪ್ರಕರಣದ ಸಾರಾಂಶ : ಬಂಟ್ವಾಳ ಸಜೀಪ ನಡು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಎಂಬವರು, ದಿನಾಂಕ 11.06.2025 ರಂದು ಮುಂಜಾನೆ, ಜೀಪ್ ನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ, ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು, ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ .68/2025 ಕಲಂ: 109, 324(4) ಜೊತೆ 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣವನ್ನು ತನಿಖೆ ನಡೆಸಿದಾಗ, ಇದೊಂದು ಸುಳ್ಳು ಪ್ರಕರಣವೆಂದು ಸಾಬೀತಾಗಿದ್ದು, ಈ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ವರದಿ ನೀಡಲಾಗಿರುತ್ತದೆ. ಮುಂದುವರಿದಂತೆ, ಸದ್ರಿ ಉಮರ್ ಪಾರೂಕ್ (48) ರವರು ಸಾರ್ವಜನಿಕರನ್ನು ಪ್ರಚೋದಿಸಿ, ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನು ಸೃಷ್ಟಿಸಿರುವುದಲ್ಲದೇ, ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿ, ಸುಳ್ಳು ದೂರು ನೀಡಿರುವ ಹಿನ್ನೆಲೆಯಲ್ಲಿ, ಆತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ : 128/2025, ಕಲಂ:192, 353(1)(b), 230(1), 248(A) BNS ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.