ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ.
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ ಚಾಲಕ ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಹುಂಡೈ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.




