ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲಬಾಳುವ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ ಲಗೇಜ್ ಲೋಡ್ ಅನ್ ಲೋಡ್ ಮಾಡುತ್ತಿದ್ದವರು ಎಂದು ಹೇಳಲಾಗಿದೆ.
ರಾಜೇಶ್ವರಿ ಪದ್ಮಶಾಲಿ ಎಂಬವರು ಸಂಬಂಧಿಕರ ಮದುವೆಗಾಗಿ ಬೆಳಗ್ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.
ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಗೇಜ್ ಟ್ರೋಲಿ ಬ್ಯಾಗ್ ನ ಲಾಕ್ ತೆರೆದಿತ್ತು. ಕೂಡಲೇ ಬ್ಯಾಗ್ ಪರಿಶೀಲಿಸಿದಾಗ 56ಗ್ರಾಂ ತೂಕದ ಸುಮಾರು 4.5ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ತಿಳಿದು ಬಂದಿದೆ.
ಈ ಕುರಿತು ರಾಜೇಶ್ವರಿ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.