ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ ದಾಟಲು ಕಾಯುತ್ತಿದ್ದ ಇಬ್ಬರು ಮಹಿಳೆಯರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತ ಮಹಿಳೆಯನ್ನು ಸಾಸ್ತಾನ ಮೂಲದ ಮಮತಾ (40) ಎಂದು ಗುರುತಿಸಲಾಗಿದೆ.
ಮಾಹಿತಿಯಂತೆ, ಹೆದ್ದಾರಿಯ ಪೂರ್ವ ಭಾಗದಿಂದ ಪಶ್ಚಿಮ ಭಾಗಕ್ಕೆ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದ ವೇಳೆ ವೇಗವಾಗಿ ಬಂದ ಕಾರು ಇಬ್ಬರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಮಮತಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು, ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




