ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ ಬಡವ ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.
2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ದುರುದ್ದೇಶ ಪೂರ್ವಕವಾಗಿ ಹಿಜಾಬ್ ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿ ರಾಜ್ಯ ಹಾಗೂ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿ ಶಿಕ್ಷಣ ವ್ಯವಸ್ಥೆಗೆ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟಾಗಿದ್ದು, ಈ ಸಂದರ್ಬದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಇಂದೂ ಮರೆತಿಲ್ಲ.
ಕೇವಲ ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ಮುಂದಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡುವ ಸರ್ಕಾರ ಕೇಸರಿ ಶಾಲು ಧರಿಸಲು ಅವಕಾಶ ನೀಡದೆ ಮತ್ತೊಮ್ಮೆ ತನ್ನ ಹಿಂದೂ ವಿರೋಧಿ ನಿಲುವನ್ನು ಮುಂದುವರೆಸಿದೆ.


ಈ ಹಿಂದೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ಹೈಕೋರ್ಟ್ನ ತ್ರಿಸದಸ್ಯ ಪೀಠ ನೀಡಿದ ತೀರ್ಪು ನೀಡಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡಲು ಅತಿ ಮುತುವರ್ಜಿ ವಹಿಸುತ್ತಿರುವ ರಾಜ್ಯ ಸರಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.
![60g47j4me2cc98agvpy1me1touw8yashpal-suvarna[1]](https://primetvlive.in/wp-content/uploads/2026/05/60g47j4me2cc98agvpy1me1touw8yashpal-suvarna1-640x384.webp)



