ಮಣಿಪಾಲ ಠಾಣಾ ವ್ಯಾಪ್ತಿಯ ಶಾಂತಿನಗರ ಸಮೀಪದ ಪಿಜಿಯೊಂದರಲ್ಲಿ ನಡೆದ ಯುವತಿಯ ಕೊಲೆ ಯತ್ನ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.
ಶಾಂತಿನಗರ ಸಮೀಪದ ವಾಗ್ಲೆ ಸ್ಟೋರ್ ಬಳಿಯ ಪಿಜಿಯೊಂದರಲ್ಲಿ ವಾಸವಿದ್ದ ಅಂಕೋಲಾ ಮೂಲದ ಯೋಗಿತಾ(23) ಮೇಲೆ ಮೇ. 12 ರ ರಾತ್ರಿ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನ ನಡೆದಿತ್ತು. ಆಕೆಯ ಸ್ನೇಹಿತೆಯರು ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದು, ಬೆಳಗ್ಗೆ ಪಿಜಿಗೆ ವಾಪಾಸ್ಸಾದಾಗ ಘಟನೆಗೆ ಬೆಳಕಿಗೆ ಬಂದಿತ್ತು. ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.
ಪಿಜಿಯ ಸುತ್ತಮುತ್ತ ಇರುವ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಪಿಜಿ ಸುತ್ತ ಸಿಸಿ ಕ್ಯಾಮರಾ ಇಲ್ಲದೇ ಇರುವುದರಿಂದ ತನಿಖೆಗೆ ಅಡ್ಡಿಯಾಗುತ್ತಿದೆ. ಪೊಲೀಸರು ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಿದ್ದಾರೆ. ಅಲ್ಲದೇ ಯುವತಿಯೊಂದಿಗೆ ಪಿಜಿಯಲ್ಲಿ ವಾಸವಿದ್ದ ಯುವತಿಯರ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಅವರ ವಿಚಾರಣೆಯನ್ನೂ ನಡೆಸಲಾಗಿದೆ. ಮೇಲ್ನೋಟಕ್ಕೆ ಪ್ರೇಮ ಪ್ರಕರಣದಿಂದಾಗಿ ಕೊಲೆ ಯತ್ನ ನಡೆದಿದೆ ಎನ್ನಲಾಗುತ್ತಿದೆಯಾದರೂ ಪೊಲೀಸರಿಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಆಕೆ ಕೆಲಸ ಮಾಡುತ್ತಿದ್ದ ಬುಕ್ ಬೈಂಡಿಂಗ್ ಕಂಪನಿಯ ಮಾಲಕರು ಹಾಗೂ ಕೆಲಸದವರ ಹೇಳಿಕೆಗಳನ್ನು ಪಡೆದುಕೊಂಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.




