ಮಲ್ಪೆ: ಉಡುಪಿ ಜಿಲ್ಲೆಯ ಕೊಡವೂರು ಸಮೀಪ ಗರಡಿ ಮಜಲಿನಲ್ಲಿ ನೂತನ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೊಪ್ಪಳ ಮೂಲದ ರಮೇಶ್ ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ.
ಗರಡಿಮಜಲು ಸಮೀಪ ಬಾವಿ ನಿರ್ಮಾಣದ ಸಂದರ್ಭದಲ್ಲಿ ಏಕಾಏಕಿ ಮರಳು ಹಾಗೂ ಮಣ್ಣು ಕುಸಿದಿದೆ. ಕಾಮಗಾರಿ ನಡೆಸುತ್ತಿದ್ದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದು, ಓರ್ವನನ್ನು ರಕ್ಷಿಸಲಾಗಿದೆ. ಮತ್ತೋರ್ವ ಕಾರ್ಮಿಕ ರಮೇಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ಸಹಕಾರದೊಂದಿಗೆ ಮಣ್ಣು ತೆರವುಗೊಳಿಸುವ ಕಾರ್ಯ ಮುಂದುವರಿದಿದೆ.
ಸುಮಾರು ಏಳೆಂಟು ಅಡಿ ಆಳದ ಹೊಂಡದಲ್ಲಿ ಮಣ್ಣು ತುಂಬಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ಕಾರ್ಮಿಕನನ್ನು ಶವವನ್ನು ಮೇಲಕ್ಕೆತ್ತಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಸ್ಥಳದಲ್ಲಿ ಮಲ್ಪೆ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.







