Home Kundapura News ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ…!!

ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ…!!

ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ ಹೋರಾಟಗಾರ್ತಿ ನಾಗರತ್ನ ನೇತೃತ್ವದಲ್ಲಿ ಕುಂದಾಪುರ ಉಪ ವಿಭಾಗ ಸಹಾಯಕ ಕಮಿಷನರ್ (AC) ಕಚೇರಿ ಮುಂದೆ ಇಂದಿನಿಂದ (ಮೇ 27) “ಒಲೆ ಹೂಡಿ – ಅನ್ನ ಬೇಯಿಸುವ” ವಿಭಿನ್ನ ಹಾಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.

ರಾಜ್ಯ ಕಂದಾಯ ಸಚಿವರಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಹಕ್ಕೋತ್ತಾಯ ಪತ್ರ ಸಲ್ಲಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಜಮೀನು ಒತ್ತುವರಿಗೆ ನೇರ ಸಹಕಾರ ನೀಡಿದ ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ (FDA) ರಾಘವೇಂದ್ರ ಮತ್ತು ಕರ್ತವ್ಯ ಲೋಪ ಎಸಗಿದ ಕುಂದಾಪುರ ತಹಶೀಲ್ದಾರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಅಕ್ರಮ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸುವಂತೆ ಆಗ್ರಹಿಸಿದ್ದಾರೆ.

ಅಕ್ರಮ ಕಾಮಗಾರಿ ನಡೆಯುತ್ತಿರುವಾಗ ಹಂತ ಹಂತವಾಗಿ ವಂಡ್ಸೆ ಕಂದಾಯ ನಿರೀಕ್ಷಕ FDA ರಾಘವೇಂದ್ರ ಅವರ ಗಮನಕ್ಕೆ ತರಲಾಗಿದ್ದರೂ, ಅವರು ಅಕ್ರಮ ತಡೆಯುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ಬದಲಿಗೆ, ಅತಿಕ್ರಮಣದಾರರೊಂದಿಗೆ ಶಾಮೀಲಾಗಿ ಕಟ್ಟಡ ಪೂರ್ಣಗೊಳ್ಳುವವರೆಗೆ ಪರೊಕ್ಷವಾಗಿ ಬೆಂಬಲ ನೀಡಿದ್ದಾರೆ. ಅಕ್ರಮವನ್ನು ಪ್ರಶ್ನಿಸಿದ ಹೋರಾಟಗಾರರ ಮೊಬೈಲ್ ಸಂಖ್ಯೆಗಳನ್ನು ಬ್ಲಾಕ್ ಲಿಸ್ಟ್‌ಗೆ ಹಾಕಿರುವ ರಾಘವೇಂದ್ರ, ನ್ಯಾಯ ಕೇಳಲು ಕಚೇರಿಗೆ ಹೋದ ಸಾರ್ವಜನಿಕರಿಗೆ “ನಿಮ್ಮ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸುಳ್ಳು ಕೇಸು ಹಾಕಿ ಜೈಲಿಗೆ ಕಳಿಸುತ್ತೇನೆ” ಎಂದು ನೇರ ಬೆದರಿಕೆ ಹಾಕಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.