ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100 % ಫಲಿತಾಂಶ ಬಂದ 41 ಶಾಲಾ ಕಾಲೇಜುಗಳಿಗೆ ಅಭಿನಂದನಾ ಸಮಾರಂಭ ಬೀಡಿನಗುಡ್ಡೆಯ ಯಕ್ಷಗಾನ ಕಲಾರಂಗ ಆಡಿಟೋರಿಯಂನಲ್ಲಿ ನಡೆಯಿತು.
ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ರಾಮಕೃಷ್ಣ ಆಶ್ರಮ ತುಮಕೂರಿನ ಪರಮಪೂಜ್ಯ ಶ್ರೀ ಎಸ್ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ ಉತ್ತಮ ಸಂಸ್ಕಾರ ಹಾಗೂ ಮೌಲ್ಯಾಧಾರಿತ ಆದರ್ಶವ್ಯಕ್ತಿತ್ವ ರೂಪಿಸುವ ಏಕೈಕ ವೃತ್ತಿ ಶಿಕ್ಷಕ ವೃತ್ತಿಯಾಗಿದ್ದು, ಮೌಲ್ಯಾಧಾರಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದ್ದು ಇಂದಿನ ಸಮಾಜದಲ್ಲಿ ಶೈಕ್ಷಣಿಕವಾಗಿ ಉತ್ತಮ ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಸಂಕಲ್ಪ ಮಾಡಬೇಕಿದೆ ಎಂದರು.
ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಶಾಸಕ ಯಶ್ ಪಾಲ್ ಸುವರ್ಣ ರವರ ಕಾರ್ಯ ಇತರರಿಗೂ ಪ್ರೇರಣೆ ಯಾಗಲಿ ಎಂದರು.
ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ವಿಶೇಷ ಮುತುವರ್ಜಿ ವಹಿಸಿದ ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಲೋಕೇಶ್, ಶ್ರೀ ಮಾರುತಿ, ಡಯಟ್ ಪ್ರಾಂಶುಪಾಲರಾದ ಶ್ರೀ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಯಲ್ಲಮ್ಮ, ಶ್ರೀಮತಿ ಉಮಾ ರವರನ್ನು ಅಭಿನಂದಿಸಲಾಯಿತು.
ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಕುಮಾರಿ ಕಲ್ಯಾಣಿ, ಕುಮಾರಿ ಅಶ್ವಿತ ಹಾಗೂ ನಿಶಲ್ ಪೂಜಾರಿ ಹಾಗೂ 100% ಫಲಿತಾಂಶ ಬಂದ ಶಾಲಾ ಕಾಲೇಜುಗಳಿಗೆ ನಗದು ಪುರಸ್ಕಾರ ಸಹಿತ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪ್ರತಾಪ್ ಹೆಗ್ಡೆ ಮಾರಾಳಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿ, ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.




