Home Crime ಮಗು ಕರುಣಿಸಿದ ಪ್ರಕರಣ : ಕೊನೆಗೂ ರಾಜಿ ಸಂಧಾನಕ್ಕಿಳಿದ ಕೃಷ್ಣ ರಾವ್ ಕುಟುಂಬಸ್ಥರು, ಜೂನ್ 19ರಂದು...

ಮಗು ಕರುಣಿಸಿದ ಪ್ರಕರಣ : ಕೊನೆಗೂ ರಾಜಿ ಸಂಧಾನಕ್ಕಿಳಿದ ಕೃಷ್ಣ ರಾವ್ ಕುಟುಂಬಸ್ಥರು, ಜೂನ್ 19ರಂದು ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚನೆ…!!

ಪುತ್ತೂರು : ಬಿಜೆಪಿ ಮುಖಂಡರಾಗಿದ್ದ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಆರೋಪಿ ಪರ ವಕೀಲರು ಹೈಕೋರ್ಟ್ ಮುಂದೆ ಮಂಡಿಸಿದ್ದಾರೆ.

ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಕೃಷ್ಣ ರಾವ್ ಪರ ಹಾಜರಾಗಿದ್ದ ಹಿರಿಯ ವಕೀಲ ಪಿ.ಪಿ. ಹೆಗ್ಡೆ, “ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಸಿದ್ಧರಿದ್ದು, ಈ ಪ್ರಸ್ತಾಪವನ್ನು ಪರಿಗಣಿಸಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿ ಪರ ವಕೀಲರ ಪ್ರಸ್ತಾಪವನ್ನು ಪೀಠವು ಪರಿಗಣಿಸಿದ್ದು ಇದೇ ಜೂನ್ 19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಪ್ರಮುಖರು ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ನ್ಯಾಯಪೀಠವು ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದೆ.

ಇದೇ ಸಂದರ್ಭದಲ್ಲಿ ಸಂತ್ರಸ್ತೆಯ ಜೀವನಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಈಗಾಗಲೇ ಹೈಕೋರ್ಟ್‌ನಲ್ಲಿ ಠೇವಣಿ ಇಡಲಾಗಿರುವ, ಸಂತ್ರಸ್ತೆಗೆ ನೀಡಬೇಕಾದ ಮೊದಲ ತಿಂಗಳ ಜೀವನಾಂಶ ಪರಿಹಾರ ಮೊತ್ತ ₹75,000 ವನ್ನು ತಕ್ಷಣವೇ ಸಂತ್ರಸ್ತೆಗೆ ಪಾವತಿಸಲು ರಿಜಿಸ್ಟ್ರಿಗೆ ಸೂಚಿಸಿದೆ. ಇದರೊಂದಿಗೆ, ಎರಡನೇ ತಿಂಗಳ ಪರಿಹಾರ ಮೊತ್ತವಾದ ₹75,000 ಅನ್ನು ಮುಂದಿನ ನಾಲ್ಕು ದಿನಗಳ ಒಳಗಾಗಿ ನ್ಯಾಯಾಲಯದಲ್ಲಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಆರೋಪಿ ಕೃಷ್ಣ ಜೆ. ರಾವ್‌ಗೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಒಂದೆಡೆ ಪ್ರತಿ ತಿಂಗಳು ದೊಡ್ಡ ಮೊತ್ತದ ಜೀವನಾಂಶ ನೀಡುವುದು, ಮತ್ತೊಂದು ಕಡೆ ಪ್ರಕರಣದ ಕಿರಿ ಕಿರಿಯಿಂದ ಬೇಸತ್ತ ಆರೋಪಿ ಕೃಷ್ಣ ರಾವ್ ಪರ ಕುಟುಂಬಸ್ಥರು ಇದೀಗ ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸಲು ಮುಂದಾಗಿದ್ದಾರೆ. ಈ ಹಿಂದೆ ಮದುವೆ, ರಾಜಿ ಸಂಧಾನಕ್ಕೆ ವಿಶ್ವಕರ್ಮ ಸಮಾಜದ ಮುಖಂಡರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.