Home Crime ಚಾಂತಾರು ಸಮೀಪ ರೈಲು  ಢಿಕ್ಕಿ :  ವ್ಯಕ್ತಿ ಸ್ಥಳದಲ್ಲೇ ಸಾವು…!!

ಚಾಂತಾರು ಸಮೀಪ ರೈಲು  ಢಿಕ್ಕಿ :  ವ್ಯಕ್ತಿ ಸ್ಥಳದಲ್ಲೇ ಸಾವು…!!

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಂತಾರು ಗ್ರಾಮದ ಕುಂಜಾಲ್ ರಸ್ತೆಯ ಸಮೀಪದ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಬೆಳಿಗ್ಗೆ ಸುಮಾರು 7 ಗಂಟೆಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಚಾಂತಾರು ಸಮೀಪದ ರೈಲ್ವೆ ಹಳಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ರೈಲು ಅತಿವೇಗದಲ್ಲಿ ಸಂಚರಿಸುತ್ತಿದ್ದ ಕಾರಣ ಅಪಘಾತವನ್ನು ತಪ್ಪಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಡಿಕ್ಕಿಯ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಉಡುಪಿ ರೈಲ್ವೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂಜಯ್ ವತ್ಸ್ ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಮೃತದೇಹದ ಮೇಲೆ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಸಂಬಂಧಿಕರು ಅಥವಾ ಸಾರ್ವಜನಿಕರು ಯಾವುದೇ ಮಾಹಿತಿ ಹೊಂದಿದ್ದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.